- News18 Kannada
- Last Updated: April 19, 2021, 1:21 PM IST
ನವದೆಹಲಿ (ಏ. 19): ಹೊಸನಗರದ ರಾಮಚಂದ್ರಾಪುರ ಮಠ ಹಾಗೂ ಗೋಕರ್ಣ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಮಚಂದ್ರಾಪುರ ಮಠದಿಂದ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ವಾಪಾಸ್ ಪಡೆಯಲು ಸೂಚಿಸಿರುವ ಸುಪ್ರೀಂ ಕೋರ್ಟ್ ಗೋಕರ್ಣ ದೇವಸ್ಥಾನ ನಿರ್ವಹಣೆಗೆ ಸಮಿತಿ ರಚನೆ ಮಾಡಿದೆ.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ನಿವೃತ್ತ ನ್ಯಾ. ಬಿ.ಎನ್. ಶ್ರೀಕೃಷ್ಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕುಮಟ ಉಪ ವಿಭಾಗದ ಸಹಾಯಕ ಆಯುಕ್ತ, ಇಬ್ಬರು ಪ್ರತಿಷ್ಠಿತ ವ್ಯಕ್ತಿಗಳು ಮತ್ತು ಟ್ರಸ್ಟಿನ ಇಬ್ಬರು ಸದಸ್ಯರನ್ನು ಸಮಿತಿ ಒಳಗೊಂಡಿರಲಿದೆ.
ರಾಮಚಂದ್ರಾಪುರ ಮಠದಿಂದ ದೇವಸ್ಥಾನ ಪಡೆಯಲು ಸಮಿತಿಗೆ ಸೂಚನೆ ನೀಡಲಾಗಿದ್ದು, ಮುಂದಿನ 15 ದಿನದೊಳಗೆ ದೇವಸ್ಥಾನದ ಆಡಳಿತವನ್ನು ಸುಪರ್ದಿಗೆ ಪಡೆಯಲು ಸಮಿತಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಹಲವು ವರ್ಷಗಳಿಂದ ನಡೆಯುತ್ತಿದ್ದ ಗೋಕರ್ಣ ದೇವಸ್ಥಾನದ ಅಧಿಪತ್ಯದ ಪ್ರಕರಣದಲ್ಲಿ ರಾಮಚಂದ್ರಾಪುರ ಮಠಕ್ಕೆ ಹಿನ್ನಡೆಯಾಗಿದೆ.
ಉತ್ತರ ಕನ್ನಡದ ಪ್ರಸಿದ್ಧ ಧಾರ್ಮಿಕ ಸ್ಥಳ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು 2008ರಲ್ಲಿ ಹೊಸನಗರ ರಾಮಚಂದ್ರಾಪುರ ಮಠ ವಹಿಸಿಕೊಂಡಿತ್ತು. ಅಂದಿನ ಬಿಜೆಪಿ ಸರ್ಕಾರ ಈ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿಕೊಟ್ಟಿತ್ತು. ಗೋಕರ್ಣ ದೇವಾಲಯವನ್ನು ಖಾಸಗಿಯವರಿಗೆ ಹಸ್ತಾಂತರಿಸುವುದನ್ನು ಪ್ರಶ್ನಿಸಿ ಬಾಲಚಂದ್ರ ವಿಘ್ನೇಶ್ವರ ದೀಕ್ಷಿತ್ ಮುಂತಾದವರು ಕೋರ್ಟ್ ಮೆಟ್ಟಿಲೇರಿದ್ದರು. ಗೋಕರ್ಣ ದೇವಸ್ಥಾನದ ಆಡಳಿತವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ 2018ರಲ್ಲಿ ರಾಮಚಂದ್ರಾಪುರ ಮಠ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ, ನ್ಯಾ. ಬೋಪಣ್ಣ, ನ್ಯಾ. ರಾಮಸುಬ್ರಹ್ಮಣ್ಯನ್ ನೇತೃತ್ವದ ನ್ಯಾಯಪೀಠ ತೀರ್ಪನ್ನು ಮುಂದೂಡಿತ್ತು. ಇಂದು ಆ ತೀರ್ಪು ಪ್ರಕಟವಾಗಿದ್ದು, ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿಗೆ ಸಮಿತಿಯನ್ನು ರಚಿಸಿದೆ. ಇನ್ನು 15 ದಿನದೊಳಗೆ ದೇವಸ್ಥಾನವನ್ನು ಸುಪರ್ದಿಗೆ ಪಡೆಯಲು ಸಮಿತಿಗೆ ಸೂಚಿಸಿದೆ.