news18-kannada Updated:April 17, 2021, 3:09 PM IST
ಮಲ್ಲಿಕಾರ್ಜುನ ಖೂಬಾ
ಬೆಂಗಳೂರು: ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಇಂದು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿಯಿಂದ ಸಿಗದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಪಕ್ಷದ ವಿರುದ್ಧ ಬಂಡಾಯ ಎದ್ದ ಕಾರಣಕ್ಕೆ ಖೂಬಾ ಅವರನ್ನು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರು ಕೋವಿಡ್ಗೆ ಬಲಿಯಾಗಿದ್ದರು. ಹೀಗಾಗಿ ಬಸವಕಲ್ಯಾಣ ಕ್ಷೇತ್ರ ತೆರವಾಗಿತ್ತು. ಇಂದು ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಅವರನ್ನು ಕಡೆಗಣಿಸಿ, ಶರಣು ಸಲಗರ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಸಹಜವಾಗಿಯೇ ಅಸಮಾಧಾನಗೊಂಡ ಖೂಬಾ ಅವರು ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.
ಇದನ್ನು ಓದಿ: Voting - ಬೆಳಗಾವಿ, ಮಸ್ಕಿ, ಬಸವಕಲ್ಯಾಣದಲ್ಲಿ ಇಂದು ಮತದಾನ; ದೇಶಾದ್ಯಂತ 16 ಕ್ಷೇತ್ರಗಳಿಗೆ ಉಪಚುನಾವಣೆ
ಕೋವಿಡ್ ಮಹಾಮಾರಿಯ ಎರಡನೇ ಅಲೆ ಕಂಟಕದ ನಡುವೆಯೂ ಅಬ್ಬರದ ಚುನಾವಣಾ ಪ್ರಚಾರ ಕಂಡಿದ್ದ ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೀದರ್ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ನಡೆಯುವ ಮತದಾನದಲ್ಲಿ ಒಟ್ಟು 30 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 12 ಅಭ್ಯರ್ಥಿಗಳಿದ್ದಾರೆ. ಇಲ್ಲಿಯ ಸ್ಪರ್ಧಾ ಕಣ ಬಹಳ ಕುತೂಹಲಕಾರಿಯಾಗಿದೆ. ಬಿಜೆಪಿಯಿಂದ ಶರಣು ಸಲಗರ ಹಾಗೂ ಕಾಂಗ್ರೆಸ್ನಿಂದ ಮಾಲಾ ಬಿ ಅವರು ಸ್ಪರ್ಧಿಸಿದ್ದಾರೆ. ಜೆಡಿಎಸ್ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಕಣದಲ್ಲಿದ್ದರೆ, ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸೆಡ್ಡು ಹೊಡೆದಿದ್ದಾರೆ. ಇಲ್ಲಿ ತ್ರಿಕೋನ ಅಥವಾ ಚತುಷ್ಕೋನ ಸ್ಪರ್ಧೆ ಏರ್ಪಡುವ ನಿರೀಕ್ಷೆ ಇದೆ. ಜೆಡಿಎಸ್ನ ಮುಸ್ಲಿಮ್ ಅಭ್ಯರ್ಥಿಯು ಇಲ್ಲಿ ಕಾಂಗ್ರೆಸ್ನ ಸಾಂಪ್ರದಾಯಿಕ ಮತಬ್ಯಾಂಕ್ ಅನ್ನ ಒಡೆಯುವ ಸಾಧ್ಯತೆ ಇದೆ. ಖೂಬಾ ಅವರು ಬಿಜೆಪಿ ಅಭ್ಯರ್ಥಿಗೆ ಕಂಟಕವಾಗುವ ಸಾಧ್ಯತೆ ಇದೆ. ಹೀಗಾಗಿ, ಅಂತಿಮವಾಗಿ ಯಾರಿಗೆ ಗೆಲುವಿನ ಮಾಲೆ ಸಿಗುತ್ತದೆ ಎಂಬುದು ಕುತೂಹಲದ ಸಂಗತಿ.
Published by:
HR Ramesh
First published:
April 17, 2021, 3:09 PM IST